KEA ಪರೀಕ್ಷೆಗೆ 16 ಲಕ್ಷಕ್ಕೂ ಅಧಿಕ ಅರ್ಜಿ: ಯುವಕರಲ್ಲಿ ಸರ್ಕಾರಿ ಉದ್ಯೋಗದತ್ತ ಒಲವು
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಹೊರಡಿಸಿರುವ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿವಿಲ್ ಪೊಲೀಸ್, ವಸತಿ ಶಾಲೆಗಳ ಶಿಕ್ಷಕರು, ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹಾಗೂ ಭೂ ಮಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಬರೋಬ್ಬರಿ 16 ಲಕ್ಷಕ್ಕೂ ಹೆಚ್ಚು ಆಕಾಂಕ್ಷಿಗಳು ನೇಮಕಾತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ಕೆಇಎ ಕಳೆದ ಜೂನ್ನಲ್ಲಿ ವಿವಿಧ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಗಳನ್ನು ಹೊರಡಿಸಿತ್ತು. ಈ ನೇಮಕಾತಿ ಪರೀಕ್ಷೆಗಳು ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ನಡೆಯುವ ನಿರೀಕ್ಷೆಯಿದೆ. ಇತ್ತೀಚಿನ ವರ್ಷಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ನೇಮಕಾತಿಗಳು ನಡೆಯದಿರುವುದು ಹಾಗೂ ರಾಜ್ಯ ಸರ್ಕಾರ ಒಂದೇ ಬಾರಿಗೆ 70 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿರುವುದು, ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಅರ್ಜಿಗಳು ಸಲ್ಲಿಕೆಯಾಗಲು ಪ್ರಮುಖ ಕಾರಣವಾಗಿದೆ. Karnataka Government Jobs: ಏಕೆ ಇಷ್ಟೊಂದು ಅರ್ಜಿಗಳು? ಕೊರೊನಾ ನಂತರ ಸರ್ಕಾರಿ ಇಲಾಖೆಗಳಲ್ಲಿನ ದೊಡ್ಡ ಪ್ರಮಾಣದ ನೇಮಕಾತಿ ಪ್ರಕ್ರಿಯೆಗಳು ಕಡಿಮೆಯಾಗಿದ್ದವು. ಕಳೆದ 5ರಿಂದ 6 ವರ್ಷಗಳ ಅವಧಿಯಲ್ಲಿ ದ್ವಿತೀಯ ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿ, ಸರ್ಕಾರಿ ಉದ್ಯೋಗಕ್ಕೆ ಅಗತ್ಯವಿರುವ ವಯೋಮಿತಿ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕೆಲವು ನಿಗಮ-ಮಂಡಳಿಗಳು ಹಾಗೂ ಪ್ರತ್ಯೇಕ ಇಲಾಖೆಗಳ ಮಟ್ಟದಲ್ಲಿ ಬೆರಳೆಣಿಕೆಯ ಹುದ್ದೆಗಳಿಗೆ ಮಾತ್ರ ನೇಮಕಾತಿ ನಡೆದಿತ್ತು. ಆದರೆ, ಸಾವಿರಾರು ಹುದ್ದೆಗಳಿಗೆ ಒಂದೇ ಬಾರಿಗೆ ಅರ್ಜಿ ಆಹ್ವಾನಿಸಿರುವ ಸಂದರ್ಭಗಳು ವಿರಳವಾಗಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಸಾವಿರಾರು ಯುವಕರು ಈಗಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. Also Read Karnataka Govt Jobs: ಸರ್ಕಾರಿ ಉದ್ಯೋಗ ಪರೀಕ್ಷೆಯಲ್ಲಿ ಕನ್ನಡಕ್ಕೆ 50, ಇಂಗ್ಲಿಷ್ಗೆ 20 ಅಂಕ! ಬಿಳಿಮಲೆ ಒತ್ತಾಯ Karnataka Government Jobs: ಖಾಸಗಿ ವಲಯದ ಅನಿಶ್ಚಿತತೆ ಇತ್ತೀಚಿನ ವರ್ಷಗಳಲ್ಲಿ ಖಾಸಗಿ ವಲಯದಲ್ಲಿ ಉದ್ಯೋಗದ ಅನಿಶ್ಚಿತತೆಯೂ ಹೆಚ್ಚಾಗಿದೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳು ಸೇರಿದಂತೆ ಹಲವು ಕ್ಷೇತ್ರಗಳ ಉದ್ಯೋಗಿಗಳಲ್ಲಿ ಉದ್ಯೋಗ ಭದ್ರತೆಯ ಆತಂಕ ಮೂಡಿದೆ. ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ ಉದ್ಯೋಗ ಭದ್ರತೆ ಇರುವ ಕಾರಣ, ವಿವಿಧ ವಿದ್ಯಾರ್ಹತೆ ಹೊಂದಿರುವ ಯುವಕರು ಸರ್ಕಾರಿ ಹುದ್ದೆಗಳತ್ತ ಮುಖ ಮಾಡುತ್ತಿದ್ದಾರೆ. "ನನ್ನದೂ ಒಂದು ಪ್ರಯತ್ನವಿರಲಿ" ಎಂಬ ಉದ್ದೇಶದಿಂದ ಲಕ್ಷಾಂತರ ಅಭ್ಯರ್ಥಿಗಳು ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಖಾಸಗಿ ಕೋಚಿಂಗ್ ಕೇಂದ್ರದ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಾರೆ. Recommended For You KEA Updates: ಕರ್ನಾಟಕದಲ್ಲಿ 945 ಕೃಷಿ ಅಧಿಕಾರಿಗಳ ನೇಮಕಾತಿ ಪರೀಕ್ಷೆ ರದ್ದು, VAO ಹುದ್ದೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ 4,744 ವಿವಿಧ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 4,744ಕ್ಕೂ ಹೆಚ್ಚು ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಮುಂದುವರಿದಿದೆ. ಆದರೆ, ಕೆಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅರ್ಜಿ ಸಲ್ಲಿಸಿ ಹಲವು ತಿಂಗಳುಗಳಾದರೂ ಪರೀಕ್ಷೆ, ಫಲಿತಾಂಶ ಹಾಗೂ ಮುಂದಿನ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಸ್ಪಷ್ಟತೆ ದೊರೆಯಬೇಕೆಂದು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗಕ್ಕಾಗಿ ಹೆಚ್ಚುತ್ತಿರುವ ಪೈಪೋಟಿ ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಮೇಲಿನ ಆಸಕ್ತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿರಾರು ಹುದ್ದೆಗಳಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಿ, ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಪೂರ್ಣಗೊಳಿಸಬೇಕು ಎಂಬುದು ಉದ್ಯೋಗಾಕಾಂಕ್ಷಿಗಳ ಪ್ರಮುಖ ಬೇಡಿಕೆಯಾಗಿದೆ. ನಿರುದ್ಯೋಗ ಸಮಸ್ಯೆಯೂ ಅನಾವರಣ ಸಾವಿರಾರು ಹುದ್ದೆಗಳಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವ ಬೆಳವಣಿಗೆ ರಾಜ್ಯದಲ್ಲಿ ಯುವಜನರ ನಡುವೆ ಇರುವ ಉದ್ಯೋಗದ ತೀವ್ರ ಪೈಪೋಟಿಯನ್ನು ಸ್ಪಷ್ಟಪಡಿಸಿದೆ. ಅಲ್ಲದೆ, ಇದು ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆಯ ಪ್ರಮಾಣವನ್ನೂ ಪ್ರತಿಬಿಂಬಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಒಟ್ಟಾರೆ, ಹಲವು ವರ್ಷಗಳಿಂದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದ ಅರ್ಹ ಅಭ್ಯರ್ಥಿಗಳು ಒಂದೇ ಬಾರಿಗೆ ವಿವಿಧ ಇಲಾಖೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವುದರಿಂದ, 10 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಸುಮಾರು 16 ಲಕ್ಷ ಅಭ್ಯರ್ಥಿಗಳ ಪೈಪೋಟಿ ಏರ್ಪಟ್ಟಿದೆ. ಇದೀಗ ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಗಳು ಅಭ್ಯರ್ಥಿಗಳಿಗೆ ಅತ್ಯಂತ ಮಹತ್ವದ್ದಾಗಿವೆ.














Comments