ಪಶ್ಚಿಮ ಘಟ್ಟಗಳ ESA ಕುರಿತು ವಿಶೇಷ ಅಧಿವೇಶನ: ಸಿಎಂ
ಬೆಂಗಳೂರು: ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆ ಕುರಿತು ಚರ್ಚಿಸಿ, ಪಕ್ಷಾತೀತವಾಗಿ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಬಗ್ಗೆ ಪಕ್ಷದ ಶಾಸಕರು ಹಾಗೂ ಹಿಂದಿನ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಸಭೆ ಬಳಿಕ ಡಿ ಕೆ ಶಿವಕುಮಾರ್ ಮಾತನಾಡಿ, ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು. ಆರು ರಾಜ್ಯಗಳ 56,000 ಚ.ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸಲು ಕೇಂದ್ರ ಪ್ರಸ್ತಾಪಿಸಿದೆ. ಕರ್ನಾಟಕದ 20,668 ಚ.ಕಿ.ಮೀ. ಪ್ರದೇಶ, 10 ಜಿಲ್ಲೆಗಳ (ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಉಡುಪಿ) 33 ತಾಲ್ಲೂಕುಗಳು ಹಾಗೂ 1,449 ಗ್ರಾಮಗಳು ESA ವ್ಯಾಪ್ತಿಗೆ ಸೇರುತ್ತವೆ. ಕೃಷಿಕರ ಜೀವನೋಪಾಯ ಹಾಗೂ ಭವಿಷ್ಯದ ಅಭಿವೃದ್ಧಿಗೆ ತೊಂದರೆಯಾಗಲಿದೆ ಎಂದರು. ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿ, ಕೇಂದ್ರ ಸರ್ಕಾರವು 31 ಜುಲೈ 2024ರ ಕರಡು ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿತ್ತು. ಆದಾಗ್ಯೂ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರ ಇದನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.














Comments